ರಾಯಚೂರು: ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಮೇಲ್ಚಾವಣಿಯ ಸಿಮೆಂಟ್ ಕಳಚಿ ಬಿದ್ದ ಘಟನೆ ಸೋಮವಾರ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ಪ್ರಯಾಣಿಕರು ಪಾರಾಗಿದ್ದಾರೆ.
ರವಿವಾರದಿಂದ ಸುರಿಯುತ್ತಿರುವ ಮಳೆ ಸೋಮವಾರವೂ ಮುಂದುವರಿದ ಹಿನ್ನೆಲೆಯಲ್ಲಿ ಮೇಲ್ಚಾವಣಿ ಹಸಿದು ಸಿಮೆಂಟ್ ಪದರು ಉದುರಿದೆ. ಬಸ್ ನಿಲ್ದಾಣದ ಪ್ರಾಂಗಣ 6 ರಲ್ಲಿ ಬಸ್ ಕಂಟ್ರೋಲರ್ ಕುಳಿತುಕೊಳ್ಳುವ ಸೀಟಿನ ಪಕ್ಕದಲ್ಲೇ ಸಿಮೆಂಟ್ ಬಿದ್ದು ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕಳೆದ ಎರಡು–ಮೂರು ವರ್ಷಗಳಿಂದ ಇಂತಹ ಘಟನೆಗಳು ಆಗಾಗ ನಡೆಯುತ್ತಿದ್ದರೂ ಸಾರಿಗೆ ಇಲಾಖೆಯ ಅಧಿಕಾರಿಗಳು ತಾತ್ಕಾಲಿಕ ಬಣ್ಣ ಬಳಿಸುವುದರ ಹೊರತಾಗಿ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಪ್ರಯಾಣಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಪೂರ್ಣ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೆ ದೊಡ್ಡ ಅಪಾಯ ಸಂಭವಿಸುವ ಸಾಧ್ಯತೆ ಇದೆ” ಎಂಬುದು ಅವರ ಆತಂಕ.

